Last Updated:
ವಧೂ-ವರರು ದೇವಸ್ಥಾನದ ಸುತ್ತಲೂ ಪ್ರದಕ್ಷಿಣೆ ಬಂದು, ಬಳಿಕ ಮದುವೆಯ ಭವ್ಯ ಮೆರವಣಿಗೆಯಲ್ಲಿ ಅಮೃತವರ್ಷಿಣಿ ಸಭಾಭವನಕ್ಕೆ ತೆರಳಿದರು.
ದಕ್ಷಿಣ ಕನ್ನಡ: ಧರ್ಮಸ್ಥಳದಲ್ಲಿ(Dharmastala) 53ನೇ ವರ್ಷದ ಉಚಿತ ಸಾಮೂಹಿಕ ವಿವಾಹ ಮಹೋತ್ಸವ(Free Mass Marriage) ನಡೆದಿದೆ. ಈ ವರ್ಷ 75 ಜೊತೆ ವಧೂ-ವರರು ಗೃಹಸ್ಥಾಶ್ರಮಕ್ಕೆ ಕಾಲಿಟ್ಟಿದ್ದಾರೆ. ನವದೆಹಲಿಯ ಕರ್ನಾಟಕ ಸರ್ಕಾರದ ವಿಶೇಷ ಪ್ರತಿನಿಧಿ ಟಿ.ಬಿ. ಜಯಚಂದ್ರ ನೂತನ ದಂಪತಿಗಳಿಗೆ(New Couple) ಶುಭ ಹಾರೈಸಿದ್ದಾರೆ. ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರು, ಹೇಮಾವತಿ ವೀರೇಂದ್ರ ಹೆಗ್ಗಡೆ, ಟಿ.ಬಿ. ಜಯಚಂದ್ರ ಹಾಗೂ ಗಣ್ಯ ಅತಿಥಿಗಳು ಮಂಗಳಸೂತ್ರ(Mangalsutra) ವಿತರಿಸಿದರು.
ಧರ್ಮಸ್ಥಳದ ಅಮೃತವರ್ಷಿಣಿ ಸಭಾಭವನದಲ್ಲಿ ಶನಿವಾರ ಸಂಜೆ ಗಂಟೆ 6.48 ಕ್ಕೆ ಗೋಧೂಳಿ ಲಗ್ನ ಸುಮುಹೂರ್ತದಲ್ಲಿ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಧರ್ಮೋತ್ಥಾನ ಟ್ರಸ್ಟ್ ಆಶ್ರಯದಲ್ಲಿ ಆಯೋಜಿಸಿದ 53ನೇ ವರ್ಷದ ಉಚಿತ ಸಾಮೂಹಿಕ ಸಮಾರಂಭದಲ್ಲಿ 75 ಜೊತೆ ವಧೂ-ವರರು ಗೃಹಸ್ಥಾಶ್ರಮಕ್ಕೆ ಪಾದಾರ್ಪಣೆ ಮಾಡಿದ್ದಾರೆ. ವಧೂ-ವರರು ದೇವಸ್ಥಾನದ ಸುತ್ತಲೂ ಪ್ರದಕ್ಷಿಣೆ ಬಂದು, ಬಳಿಕ ಮದುವೆಯ ಭವ್ಯ ಮೆರವಣಿಗೆಯಲ್ಲಿ ಅಮೃತವರ್ಷಿಣಿ ಸಭಾಭವನಕ್ಕೆ ತೆರಳಿದರು.
ವೇದಘೋಷ, ಮಂಗಳವಾದ್ಯ, ಮಂತ್ರಾಕ್ಷತೆಯೊಂದಿಗೆ ಸಂಜೆ ಗಂಟೆ 6.48 ರ ಗೋಧೂಳಿ ಲಗ್ನ ಸುಮುಹೂರ್ತದಲ್ಲಿ ಹಾರ ವಿನಿಮಯ ಮತ್ತು ಮಾಂಗಲ್ಯಧಾರಣೆ ನಡೆದಿದೆ. ಅವರವರ ಜಾತಿ ಸಂಪ್ರದಾಯದಂತೆ ಧಾರ್ಮಿಕ ವಿಧಿ-ವಿಧಾನಗಳನ್ನು ನಡೆಸಲಾಯಿತು. ಸುಶ್ರಾವ್ಯವಾದ ಶೋಭಾನೆ ಹಾಡುಗಳು, ವಧು-ವರರಿಗೆ ಆರತಿ ಕಾರ್ಯಕ್ರಮ ಮದುವೆಗೆ ವಿಶೇಷ ಸೊಗಡನ್ನು ನೀಡಿತು.
ಕಳೆದ 52 ವರ್ಷಗಳಲ್ಲಿ ಧರ್ಮಸ್ಥಳದಲ್ಲಿ ಸಾಮೂಹಿಕ ವಿವಾಹದಲ್ಲಿ 12,900 ಜೋಡಿ ವಿವಾಹವಾಗಿದ್ದಾರೆ. ಅನೇಕ ಮಂದಿ ದಾನಿಗಳು ನಗದು ದೇಣಿಗೆ, ಮಂಗಳಸೂತ್ರ, ಮೂಗುತಿ, ಸೀರೆ ಮೊದಲಾದವುಗಳನ್ನು ಉಚಿತ ಸಾಮೂಹಿಕ ವಿವಾಹಕ್ಕೆ ಕೊಡುಗೆಯಾಗಿ ನೀಡಿದ್ದಾರೆ.
Dakshina Kannada,Karnataka
May 07, 2025 11:44 AM IST